
ಮಂಗಳೂರು: ನಗರದ ಜಿಲ್ಲಾ ನ್ಯಾಯಾಲಯಕ್ಕೆ ಸೋಮವಾರ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಆದರೆ ತೀವ್ರ ತಪಾಸಣೆಯ ಬಳಿಕ ಇದೊಂದು ಹುಸಿ ಬೆದರಿಕೆ ಎಂದು ತಿಳಿದು ಬಂದಿದೆ.
ಎಂದಿನಂತೆ ಸೋಮವಾರ ಕೋರ್ಟ್ ಕಲಾಪಗಳು ಆರಂಭವಾಗಿತ್ತು. ಮಧ್ಯಾಹ್ನದ ವೇಳೆ ಇ-ಮೇಲ್ ಬಂದಿರುವುದು ತಿಳಿಯಿತು ಎನ್ನಲಾಗಿದೆ. ಆರ್ಡಿಎಕ್ಸ್, ಐಇಡಿ ಸ್ಫೋಟಕಗಳನ್ನು ಬಳಸಿ ನ್ಯಾಯಾಲಯ ಸಂಕೀರ್ಣ ಕಟ್ಟಡವನ್ನು ಸ್ಫೋಟಗೊಳಿಸುವುದಾಗಿ ಇ-ಮೇಲ್ನಲ್ಲಿ ವ ಬೆದರಿಕೆ ಹಾಕಲಾಗಿತ್ತು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಹಾಗೇ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಮತ್ತು ಶ್ವಾನ ದಳವು ತೀವ್ರ ತಪಾಸಣೆ ನಡೆಸಿತು. ಬಂದರು ಠಾಣೆಯ ಪೊಲೀಸರು ಕೂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಆದರೆ ನ್ಯಾಯಾಲಯದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಹಾಗಾಗಿ ಇದೊಂದು ಹುಸಿ ಬೆದರಿಕೆ ಎಂದು ಪೊಲೀಸರು ತೀರ್ಮಾನಿಸಿದ್ದಾರೆ.
ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಕೋರ್ಟ್ ಕಲಾಪಗಳಿಗೆ ಕೆಲಕಾಲ ಹೊತ್ತು ಅಡ್ಡಿಯಾಯಿತು. ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
