April 13, 2026
WhatsApp Image 2026-04-13 at 9.57.44 AM

ಶಿಕ್ಷಕರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು ಅನಿಕೇತ್ (14) ಎಂದು ಗುರುತಿಸಲಾಗಿದೆ. ಆತ ಜಯಪುರದ ಗುರುಕುಲ ಮಾದರಿಯ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಮೃತ ವಿದ್ಯಾರ್ಥಿ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಮೂಲದವನಾಗಿದ್ದಾನೆ.

ಭಾನುವಾರ ಮಧ್ಯಾಹ್ನ ಶಿಕ್ಷಕರೊಂದಿಗೆ ಈಜುಕೊಳಕ್ಕೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈಜಾಡುತ್ತಿದ್ದಾಗ ಅನಿಕೇತ್ ನೀರಿನಲ್ಲಿ ಮುಳುಗಿ ತೀವ್ರ ಅಸ್ವಸ್ಥಗೊಂಡಿದ್ದಾನೆ. ತಕ್ಷಣವೇ ಆತನನ್ನು ನೀರಿನಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ.

ಮೃತ ಅನಿಕೇತ್ ವಿಟ್ಲದ ಕಾಶಿಮಠ ನಿವಾಸಿ ಗೋವರ್ಧನ್ ನಾಯಕ್ ಅವರ ಪುತ್ರನಾಗಿದ್ದಾನೆ. ಗೋವರ್ಧನ್ ನಾಯಕ್ ಅವರು ಜೀವವಿಮಾ ಪ್ರತಿನಿಧಿಯಾಗಿದ್ದು, ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಜೀವವಿಮಾ ನಿಗಮದ ಕಚೇರಿಯನ್ನು ಹೊಂದಿದ್ದಾರೆ. ಅವರು ವಿವಿಧ ಧಾರ್ಮಿಕ ಹಾಗೂ ಸಮಾಜಸೇವಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ.ಮೃತ ವಿದ್ಯಾರ್ಥಿಯ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಮೃತದೇಹವನ್ನು ಜಯಪುರದಿಂದ ವಿಟ್ಲಕ್ಕೆ ತರಲಾಗುತ್ತಿದೆ. ಸೋಮವಾರ ಬೆಳಗ್ಗೆ ವಿಟ್ಲದ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.ಈ ಘಟನೆಗೆ ಸಂಬಂಧಿಸಿದಂತೆ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.