

ಬೆಳ್ತಂಗಡಿ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಏಪ್ರಿಲ್ 6 ರಂದು ಧರ್ಮಸ್ಥಳದಲ್ಲಿ ನಡೆಯಬೇಕಾಗಿದ್ದ ಪ್ರತಿಭಟನೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿ ಆದೇಶಿಸಿದೆ.
ಮುಂದಿನ ವಿಚಾರಣೆವರೆಗೂ ಪ್ರತಿಭಟನೆ ನಡೆಸದಂತೆ ಸೂಚನೆ: ಪ್ರತಿಭಟನೆಗೆ ತಡೆ ನೀಡಬೇಕು ಎಂದು ಕೋರಿ ಧನಕೀರ್ತಿ ಆರಿಗ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಮುಂದಿನ ವಿಚಾರಣೆಯವರೆಗೂ ಪ್ರತಿಭಟನೆ ನಡೆಸದಂತೆ ತಾತ್ಕಾಲಿಕ ತಡೆ ನೀಡಿ ಆದೇಶಿಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರತಿಭಟನೆಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಚರ್ಚೆ ನಡೆಸಿರುವ ಕುರಿತಂತೆ ಸಂದೇಶಗಳನ್ನು ಪೀಠಕ್ಕೆ ಗಮನಕ್ಕೆ ತಂದರು. ಅಲ್ಲದೆ, ಈ ಸಂದೇಶಗಳು ನ್ಯಾಯಾಲಯ ಈ ಹಿಂದೆ ಧರ್ಮಸ್ಥಳ ದೇವಾಲಯ ಹಾಗೂ ಧರ್ಮಾಧಿಕಾರಿಗಳ ಪರವಾಗಿ ನ್ಯಾಯಾಲಯ ಹೊರಡಿಸಿದ್ದ ಆದೇಶಗಳನ್ನು ಉಲ್ಲಂಘಿಸುವ ಸಾಧ್ಯತೆಯಿದೆ. ಅಲ್ಲದೆ, ಬಲವಂತವಾಗಿ ದೇವಸ್ಥಾನ ಪ್ರವೇಶಿಸುವ ಯತ್ನಗಳ ಬಗ್ಗೆ ಚರ್ಚೆ ನಡೆದಿದೆ ಎಂದು ಪೀಠಕ್ಕೆ ತಿಳಿಸಿದರು.
ತಡೆ ನೀಡಿ ವಿಚಾರಣೆ ಮುಂದೂಡಿದ ಕೋರ್ಟ್: ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ, ಪ್ರತಿಭಟನೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತು. ಅಲ್ಲದೆ, ಪ್ರತಿಭಟನೆ ಆಯೋಜಕರಿಗೆ ತುರ್ತು ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿತು.