ನಿರ್ವಹಣೆ ಕೊರತೆಯಿಂದ ವೆನ್ಲಾಕ್ ಆಸ್ಪತ್ರೆಯ 9 ಡಯಾಲಿಸಿಸ್ ಯಂತ್ರಗಳ ಕಾರ್ಯ ಸ್ಥಗಿತ

ಮಂಗಳೂರು:ಖಾಸಗಿ ಆಸ್ಪತ್ರೆಗಳಲ್ಲಿ ತಿಂಗಳಿಗೆ ಸಾವಿರಾರು ರೂ. ಖರ್ಚು ಮಾಡಿ ಬಡ ರೋಗಿ ಗಳು ಡಯಾಲಿಸಿಸ್ ಮಾಡುವುದು ಕಷ್ಟ ಸಾಧ್ಯ. ಅದಕ್ಕಾಗಿ ದ.ಕ. ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ಕಿಡ್ನಿ ಸಮಸ್ಯೆಯಿಂದ ಬಳಲುವ ರೋಗಿಗಳು ನೆಚ್ಚಿಕೊಂಡಿರುವುದು ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಹಾಗೂ ಜಿಲ್ಲೆಯ ಸರಕಾರಿ ಆಸ್ಪತ್ರೆಗಳನ್ನು, ಆದರೆ ಜಿಲ್ಲಾಸ್ಪತ್ರೆಯ ಒಂಬತ್ತು ಡಯಾಲಿಸಿಸ್‌ ಯಂತ್ರಗಳು ಸದ್ಯ ಕಾರ್ಯ ಸ್ಥಗಿತಗೊಳಿಸಿವೆ. ಬಡ ರೋಗಿಗಳಿಗೆ ಉಚಿತ ಡಯಾಲಿಸಿಸ್ ವ್ಯವಸ್ಥೆ ಸಿಗಬೇಕೆಂಬ ನಿಟ್ಟಿನಲ್ಲಿ ಸರಕಾರವು ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್ ಯಂತ್ರಗಳು ವ್ಯವಸ್ಥೆ ಮಾಡಿದೆ. ಹಲವು ಕಡೆ ದಾನಿಗಳಿಂದ ಯಂತ್ರಗಳನ್ನು ಕೊಡುಗೆಯಾಗಿ ಪಡೆಯಲಾಗಿದೆ. ಆದರೆ ನಿರ್ವಹಣೆಯ ಕೊರತೆಯಿಂದ ಜಿಲ್ಲಾಸ್ಪತ್ರೆ ಮಾತ್ರವಲ್ಲದೆ, ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಕೇಂದ್ರಗಳಲ್ಲೂ ಡಯಾಲಿಸಿಸ್ ಯಂತ್ರಗಳು ಸದ್ಯ ಸ್ತಬ್ಧಗೊಂಡಿವೆ. ದ.ಕ. ಜಿಲ್ಲೆ ಮಾತ್ರವಲ್ಲದೆ ಸುತ್ತಮುತ್ತಲಿನ ಹಲವು ಜಿಲ್ಲೆಗಳ ಬಡರೋಗಿಗಳ ಪಾಲಿನ ಆಶಾಕಿರಣವಾಗಿ ರುವ ವೆನ್ಲಾಕ್ ಆಸ್ಪತ್ರೆಯಲ್ಲಿ 23 ಡಯಾಲಿಸಿಸ್ ಯಂತ್ರಗಳಿದ್ದು, ಈ ಪೈಕಿ 9 ಕಾರ್ಯಾಚರಿಸುತ್ತಿಲ್ಲ. ದಿನವೊಂದಕ್ಕೆ ಇಲ್ಲಿ ಸದ್ಯ 50ರಿಂದ 60ರಷ್ಟು ರೋಗಿಗಳು ಡಯಾಲಿಸಿಸ್‌ಗೆ ಒಳಪಡುತ್ತಾರೆ. ಇರುವ ಯಂತ್ರಗಳಲ್ಲಿ ರೋಗಿಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗುತ್ತಿದೆ. ಹಾಗಿದ್ದರೂ ಕಾರ್ಯಾಚರಣೆ ಸ್ಥಗಿತಗೊಳಿಸಿರುವ ಯಂತ್ರಗಳು ದುರಸ್ತಿಯಾದರೆ ಅಥವಾ ಹೊಸ ಯಂತ್ರಗಳು ಬಂದಲ್ಲಿ ಮತ್ತಷ್ಟು ರೋಗಿಗಳಿಗೆ ಪ್ರಯೋಜನ ದೊರೆಯಲಿದೆ. ಜಿಲ್ಲಾಸ್ಪತ್ರೆ ವೆನ್ಲಾಕ್ ಸೇರಿದಂತೆ ಜಿಲ್ಲೆಯಲ್ಲಿ 60 ಡಯಾಲಿಸಿಸ್‌ ಯಂತ್ರಗಳಿವೆ. ಇವುಗಳಲ್ಲಿ 45 ಯಂತ್ರಗಳು ಮಾತ್ರ ಕಾರ್ಯಾಚರಿಸುತ್ತಿವೆ. 15 ಯಂತ್ರಗಳು ಸ್ಥಗಿತಗೊಂಡಿವೆ. ಬೆಳ್ತಂಗಡಿ ತಾಲೂಕಿನ ಒಟ್ಟು ಎಂಟು ಡಯಾಲಿಸಿಸ್‌ ಯಂತ್ರಗಳಲ್ಲಿ ಏಳು, ಬಂಟ್ವಾಳದಲ್ಲಿ ಏಳರಲ್ಲಿ ಆರು ಪುತ್ತೂರಿನಲ್ಲಿ 14ರಲ್ಲಿ 11 ಹಾಗೂ ಸುಳ್ಯದಲ್ಲಿ ಎಂಟರಲ್ಲಿ ಏಳು ಕಾರ್ಯಾಚರಿಸುತ್ತಿವೆ. ಮೂಡುಬಿದಿರೆ,ಮುಲ್ಕಿ ಹಾಗೂ ಕಡಬಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಲಾ ಎರಡರಂತೆ ಡಯಾಲಿಸಿಸ್ ಯಂತ್ರಗಳಿದ್ದರೂ ಅವುಗಳ ನಿರ್ವಹಣೆಗೆ ಸಿಬ್ಬಂದಿ ನೇಮಕವಾಗದ ಕಾರಣ ಯಂತ್ರಗಳು ರೋಗಿಗಳ ಪ್ರಯೋಜನಕ್ಕೆ ಲಭ್ಯವಾಗಿಲ್ಲ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಮಾತನಾಡಿ, ಮೂಡುಬಿದಿರೆ, ಕಡಬ ಮುಲ್ಕಿಯಲ್ಲಿ ತಲಾ 2ರಂತೆ ಡಯಾಲಿಸಿಸ್ ಯಂತ್ರಗಳಿವೆ. ಅವುಗಳನ್ನು ಕಾರ್ಯಗತಗೊಳಿಸಲು ನಿರ್ದೇಶನ ಕೋರಿ ಸರಕಾರಕ್ಕೆ ಪತ್ರ ಬರೆಯಲಾ ಗಿದೆ. ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕುಗಳಲ್ಲಿ ರೋಗಿಗಳಿಗೆ ತೊಂದರೆ ಆಗದಂತೆ ಚಿಕಿತ್ಸೆ ಒದಗಿಸಲು ಕ್ರಮ ವಹಿಸಲಾಗಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯತೆಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಸಭೆಯಲ್ಲಿ ವಸ್ತಾಕ್ ಆಸ್ಪತ್ರೆಯ ಒಂಭತ್ತು ಡಯಾಲಿಸಿಸ್ ಯಂತ್ರಗಳು ಕೆಟ್ಟಿರುವ ಯಂತ್ರಗಳು ಸ್ಥಗಿತಗೊಂಡಿವೆ. ಬಗ್ಗೆ ಪ್ರಸ್ತಾಪವಾಗಿದೆ. ಅಲ್ಲಿನ ಸಿಬ್ಬಂದಿಗೆ ಆರು ತಿಂಗಳ ವೇತನ ಪಾವತಿಯಾಗದಿರುವ ಬಗ್ಗೆಯೂ ಚರ್ಚೆಯಾಗಿದ್ದು, ಕೂಡಲೇ ವೇತನ ಪಾವತಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.