April 20, 2026
WhatsApp Image 2025-12-11 at 9.44.23 AM

ಬೆಂಗಳೂರು: ಕೋಮು ದ್ವೇಷದ ಮಾತುಗಳನ್ನಾಡಿದ ಸಂಬಂಧ ಯೂಟ್ಯೂಬ್‌ ಚಾನಲ್‌ನಲ್ಲಿ ಪ್ರಸಾರವಾದ ವಿಡಿಯೋ ಆಧರಿಸಿ ಆರ್‌ಎಸ್‌ಎಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಪ್ರಭಾಕರ್‌ ಭಟ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನಡೆಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಪ್ರಭಾಕರ್‌ ಭಟ್‌ ಭಾಷಣ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಿದ್ದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಸಂಬಂಧಿತ ಪ್ರಕರಣದಲ್ಲಿ ಬಿಎನ್‌ಎಸ್‌ಎಸ್‌ ಸೆಕ್ಷನ್‌ 35(3) ನೋಟಿಸ್‌ ನೀಡಿ, ಆರೋಪಿಯ ವಾದವನ್ನು ಆಲಿಸದ ಹೊರತು ಬಂಧಿಸುವಂತಿಲ್ಲ ಎಂದು ತೆಲಂಗಾಣ ಹೈಕೋರ್ಟ್‌ ರೂಪಿಸಿರುವ ಮಾರ್ಗಸೂಚಿಗಳನ್ನು ಇತ್ತೀಚೆಗೆ ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ. ಹಾಲಿ ಪ್ರಕರಣದಲ್ಲಿ ಈ ಪ್ರಕ್ರಿಯೆ ಪಾಲಿಸಿಲ್ಲ. ಸತ್ಯೇಂದರ್‌ ಕುಮಾರ್‌ ಆಂಟಿಲ್‌ ಪ್ರಕರಣದ ತೀರ್ಪು ಆಧರಿಸಿ, ಪ್ರಭಾಕರ್‌ ಭಟ್‌ ವಿರುದ್ಧದ ಎಲ್ಲಾ ತನಿಖೆ ಮತ್ತು ಪ್ರಕ್ರಿಯೆಗೆ ತಡೆ ನೀಡಲಾಗಿದೆ ಎಂದು ಆದೇಶಿಸಿದೆ.

ಪುತ್ತೂರಿನಲ್ಲಿ ವಿವೇಕಾನಂದ ಜಯಂತಿಯಲ್ಲಿ ಭಾಗವಹಿಸಿದ್ದ ಪ್ರಭಾಕರ್‌ ಭಟ್‌ ಮುಸ್ಲಿಂ, ಕ್ರಿಶ್ಚಿಯನ್‌ ಸಮುದಾಯಗಳ ವಿರುದ್ಧ ದ್ವೇಷ ಹರಡುವಂತಹ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಮೊದಲಿಗೆ ಮೊಘಲರು, ಆನಂತರ ಕ್ರಿಶ್ಚಿಯನ್ನರು ದಾಳಿ ನಡೆಸಿದ್ದಾರೆ. ಪ್ರತ್ಯೇಕ ಪಾಕಿಸ್ತಾನ ನೀಡದಿದ್ದರೂ ಹಿಂದೂಗಳ ಮೇಲೆ ದಾಳಿ ಮಾಡುತ್ತೇವೆಂದು ಹೇಳಿದ್ದರು. ದೇವಸ್ಥಾನ ಒಡೆದು, ಗೋವು ಕತ್ತರಿಸಿ, ತಾಯಂದಿರ ಮೇಲೆ ಅತ್ಯಾಚಾರ ಮಾಡಿದ್ದಾರೆ. ಲಕ್ಷಾಂತರ ಹಿಂದೂಗಳ ಹತ್ಯೆ ಮಾಡಿದ್ದಾರೆ. ಅಂದಿನ ಚಿತ್ರ ಮತ್ತೆ ಇಂದೂ ಕಾಣುತ್ತಿದೆ ಎಂದು 2026ರ ಜ.12ರಂದು ಭಾಷಣ ಮಾಡಿದ್ದರು.

ಆ ಭಾಷಣವನ್ನು ಯೂಟ್ಯೂಬ್‌ ಚಾನಲ್‌ನಲ್ಲಿ ಪ್ರಸಾರ ಮಾಡಲಾಗಿದೆ ಎಂದು ದೂರಲಾಗಿತ್ತು. ಅದನ್ನು ಆಧರಿಸಿ ಕಲ್ಲಡ್ಕ ಪ್ರಭಾಕರ್‌ ಭಟ್‌, ಯೂಟ್ಯೂಬ್‌ ಮತ್ತು ಕಾರ್ಯಕ್ರಮದ ಸಂಘಟಕರ ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ಗಳಾದ 196, 299, 302, 353(2) ಜತೆಗೆ 3(5)ಅಡಿ ಪ್ರಕರಣ ದಾಖಲಿಸಲಾಗಿತ್ತು. ಅದನ್ನು ರದ್ದುಗೊಳಿಸಲು ಭಟ್‌ ಹೈಕೋರ್ಟ್‌ ಮೊರೆ ಹೋಗಿದ್ದರು.

About The Author

Leave a Reply

Your email address will not be published. Required fields are marked *

You cannot copy content of this page.