
ಉಡುಪಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳಿಗ್ಗೆ ಸುರಿದ ಬಿರುಸಿನ ಮಳೆಗೆ ನಗರ ಹಾಗೂ ಸುತ್ತಮುತ್ತಲಿನ ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ.
ಉಡುಪಿ ನಗರದ ಗುಂಡಿಬೈಲು, ಪಾಡಿಗಾರು, ಕರಂಬಳ್ಳಿ ಪ್ರದೇಶದಲ್ಲಿ ಭಾರಿ ಮಳೆಗೆ ರಸ್ತೆಗಳಲ್ಲಿ ಮಳೆ ನೀರು ಸಂಗ್ರಹ ಗೊಂಡು ವಾಹನ ಸವಾರರು ಪರದಾಡಿದರು
ಸೋಮವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಕೆಲಸಕ್ಕೆ ತೆರಳುವವರು, ಶಾಲೆ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆಯಾಯಿತು.
ಧಾರಾಕಾರ ಮಳೆ ಮುಂದುವರಿದಿರುವುದರಿಂದ ಕೆಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ ಎಂದು ಜನರು ಆತಂಕ ವ್ಯಕ್ತಪಡಿಸಿದ್ದಾರೆ.
ಗುಂಡಿಬೈಲಿನ ಕೆನರಾ ಬ್ಯಾಂಕ್ ಬಳಿ ರಸ್ತೆಯಲ್ಲಿ ಮಳೆ ನೀರು ಸಂಗ್ರಹಗೊಂಡು ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು. ಕೆಲವು ಅಂಗಡಿಗಳಿಗೂ ಮಳೆ ನೀರು ನುಗ್ಗಿದೆ.
ಕರಂಬಲ್ಲಿಯ ವೆಂಕಟರಮಣ ಲೇಔಟ್ ನಲ್ಲಿ ಹಲವು ಮನೆಗಳಿಗೆ ನೆರೆ ನೀರು ನುಗ್ಗಿದೆ.
