
ಉಡುಪಿ : ಜಿಲ್ಲೆಗೊಂದು ಸುಸಜ್ಜಿತ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಕೇಂದ್ರ ಸಚಿವ ಜೆಪಿ ನಡ್ಡಾ ಅವರಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದರು.
ಕೇಂದ್ರ ಸಚಿವರನ್ನು ಭೇಟಿಯಾದ ಅವರು ಉಡುಪಿ ಜಿಲ್ಲೆ ಸುಮಾರು 167 ಗ್ರಾಮ ಪಂಚಾಯಿತಿ ಮತ್ತು 15 ಲಕ್ಷ ಜನಸಂಖ್ಯೆ ಹೊಂದಿರುವ ಪ್ರದೇಶವಾಗಿದ್ದು ಶಿಕ್ಷಣ ಕ್ಷೇತ್ರ, ದೇವರ ಬೀಡು, ಪ್ರವಾಸಿ ತಾಣವನ್ನು ಹೊಂದಿರುವ ಉಡುಪಿ ಜಿಲ್ಲೆಗೆ ಒಂದು ಸುಸಜ್ಜಿತವಾದ ಮೆಡಿಕಲ್ ಕಾಲೇಜಿನ ಅವಶ್ಯಕತೆ ಇದೆ.ಆರೋಗ್ಯ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ, ಬಡ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಅಗತ್ಯವಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾದರೆ ತಜ್ಞ ವೈದ್ಯರ ನೇಮಕ ನಡೆಯಲಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಅವರ ಸೇವೆ ಲಭ್ಯವಾಗಲಿದೆ. ಇದಕ್ಕೆ ಸ್ಪಂದಿಸಿದ ಸಚಿವರು ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ನೀಡುವುದರ ಬಗ್ಗೆ ಪರಿಶೀಲನೆ ಮಾಡುವುದಾಗಿ ತಿಳಿಸಿದರು.
