

ಕಡಬ: ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿದ ಬಳಿಕ ಆನೆಯನ್ನು ಸಾಗಿಸುತ್ತಿರುವಾಗ ಅಧಿಕಾರಿಗಳು ಮತ್ತು ಪೋಲಿಸ್ ಸಿಬಂದಿಗಳ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಗುರುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಅರಣ್ಯಾಧಿಕಾರಿಗಳ ಮತ್ತು ಪೊಲೀಸರ ವಾಹನಗಳು ಜಖಂಗೊಂಡಿದ್ದು, ಡಿವೈಎಸ್ಪಿ ಸಹಿತ ಮೂವರಿಗೆ ಗಾಯಗಳಾಗಿವೆ. ಸೆರೆ ಹಿಡಿದ ನಂತರ ಉಳಿದ ಆನೆಗಳನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕಿಡಿಗೇಡಿಗಳು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್ ಜೀಪ್ ಗೆ ಹಾನಿಗೈದಿದ್ದಾರೆ.
ನರಹಂತಕ ಆನೆಯನ್ನು ಸೆರೆ ಹಿಡಿದು ಸ್ಥಳಾಂತರಿಸಿದ ನಂತರ ಕಾರ್ಯಾಚರಣೆ ಮುಂದುವರಿಸುವುದಾಗಿ ಅಧಿಕಾರಿಗಳು ಸಾರ್ವಜನಿಕರಿಗೆ ತಿಳಿಸಿದರೂ ಒಪ್ಪದ ಕೆಲವರು ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿ ಬಳಿಕ ಕಲ್ಲು ತೂರಾಟ ನಡೆಸಿ ಆಖ್ರೋಶ ವ್ಯಕ್ತಪಡಿಸಿದರು. ಸೆರೆ ಹಿಡಿದ ಕಾಡಾನೆ.. ಪರಿಸ್ಥಿತಿ ಕೈ ಮೀರಿ ಹೋಗುವ ಸಂದರ್ಭ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ . ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ನಿಯೋಜನೆ ಮಾಡಲಾಗಿದ್ದು, ಕಾಡಾನೆಗಳ ಸೆರೆ ಹಿಡಿಯುವ ಕಾರ್ಯಾಚರಣೆ ಮುಂದುವೆರೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ಸ್ಪಷ್ಟಪಡಿಸಿದ್ದು, ಸಾರ್ವಜನಿಕರು ತಾಳ್ಮೆಯಿಂದ ಇದ್ದು ಅಧಿಕಾರಿಗಳಿಗೆ ಸಹಕಾರ ನೀಡಬೇಕೆಂದು ಹೇಳಿದ್ದಾರೆ.