
ಪುತ್ತೂರು : ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಫೆ.26ರಂದು ಈ ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೇದಶ್ರೀ ನಿಡ್ಯಾ ತಮ್ಮ ಕಾರ್ಯನಿರ್ವಹಣೆಯಲ್ಲಿ ತೋರಿದ ವೈಫಲ್ಯವನ್ನು ಮುಂದಿಟ್ಟುಕೊಂಡು ಅವರನ್ನು ಅಮಾನತುಗೊಳಿಸಲಾಗಿದೆ. ಪುತ್ತೂರು ಡಯಾಲಿಸಿಸ್ ಆರೋಗ್ಯ ಇಲಾಖೆ ಕಟ್ಟಡದಿಂದ ಆಗುತ್ತಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯರು ಫೆ.16ರಂದು ಸಾರ್ವಜನಿಕ ಸ್ಥಳದಲ್ಲಿ ಪೂರ್ವಾನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ್ದರು. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿರುವುದಾಗಿ ಪೊಲೀಸರು ತಿಳಿಸಿದ್ದರು. ಅಲ್ಲದೆ ಪ್ರತಿಭಟನೆ ಸಂದರ್ಭ ಪ್ರಾಂಶುಪಾಲೆ ವೇದಶ್ರೀ ಹಾಗೂ ಪ್ರಾಧ್ಯಾಪಕ ಐವನ್ ಫ್ರಾನ್ಸಿಸ್ ಲೋಬೋ ಅಲ್ಲಿದ್ದರೂ ವಿದ್ಯಾರ್ಥಿಗಳನ್ನು ತಡೆಯಲು ಯಾವುದೇ ಕ್ರಮ ವಹಿಸದೇ ಅವರಿಗೆ ಪ್ರೇರೇಪಿಸಿರುವ ಬಗ್ಗೆ ಇಲಾಖೆಗೆ ಗುಪ್ತ ಮಾಹಿತಿ ಬಂದಿರುವುದಾಗಿ ಪೊಲೀಸರು ತಿಳಿಸಿದ್ದರು. ಅಲ್ಲದೆ ಪುತ್ತೂರು ಶಾಸಕರು ಕೂಡ ಪ್ರಾಂಶುಪಾಲರ ವರ್ತನೆಯನ್ನು ಖಂಡಿಸಿ, ವಿದ್ಯಾರ್ಥಿಗಳು ಡಯಾಲಿಸಿಸ್ ಕೇಂದ್ರದ ನಿರ್ಮಾಣ ಕಾಮಗಾರಿಯಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಆರೋಗ್ಯದ ಸಮಸ್ಯೆಗಳಾಗಲಿ, ತೊಂದರೆಗಳಾಗಲಿ ಯಾವುದೇ ಮಾಹಿತಿಯನ್ನು ಶಾಸಕರ ಅಥವಾ ಸಂಬಂಧಿಸಿದ ಇಲಾಖೆಗಳ ಗಮನಕ್ಕೆ ತಂದಿಲ್ಲ ಮತ್ತು ಈ ವಿಚಾರವಾಗಿ ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿ ವಿದ್ಯಾರ್ಥಿಗಳಿಂದ ಸರ್ಕಾರದ ವಿರುದ್ಧ/ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿರುವುದಾಗಿ ತಿಳಿಸಿದ್ದರು.
ಶಾಲಾ ಅವಧಿಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ, ಜವಾಬ್ದಾರಿ ಶಾಲಾ ಆಡಳಿತ ಮಂಡಳಿ ಹೊಣೆಯಾಗಿದ್ದು, ಪ್ರತಿಭಟನೆ ರಸ್ತೆಯಲ್ಲಿ ಮಾಡುವ ಸಂದರ್ಭ ಏನಾದರೂ ಅನಾಹುತವಾದಲ್ಲಿ ಪ್ರಾಂಶುಪಾಲರು, ಪ್ರಾಧ್ಯಾಪಕರೇ ಹೊಣೆ ಆಗುತ್ತಾರೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಅವರನ್ನು ಅಮಾನತು ಮಾಡಲಾಗಿದೆ.
