

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡಲು ತೀರ್ಮಾನ ಮಾಡಿರುವ ನಿರ್ಧಾರ ಕೈಬಿಟ್ಟು ರಾಜ್ಯ, ರಾಷ್ಟ್ರ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡುವಂಥ ಮಹನೀಯರ ಹೆಸರನ್ನು ಇಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದು ಮನವಿ ಮಾಡಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರಿಡುವುದಾಗಿ ನೀವು ಘೋಷಣೆ ಮಾಡಿರುತ್ತೀರಿ. ನೀವು ನನ್ನ ಮೇಲಿಟ್ಟಿರುವ ಈ ವಿಶೇಷ ಪ್ರೀತಿ, ಅಭಿಮಾನಕ್ಕೆ ಧನ್ಯವಾದ. ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಘ-ಸಂಸ್ಥೆಗಳಿಗೂ ನಾನು ಈ ಸಂದರ್ಭದಲ್ಲಿ ಧನ್ಯವಾದ ಸಲ್ಲಿಸುತ್ತೇನೆ. ಈ ರಾಷ್ಟ್ರ ಹಾಗೂ ರಾಜ್ಯದ ಅಭಿವೃದ್ಧಿಗೆ ಅನೇಕ ಮಹನೀಯರು ಹಾಗೂ ದೇಶಭಕ್ತರು ಕೊಡುಗೆ ನೀಡಿದ್ದಾರೆ. ಅವರಿಗೆ ಹೋಲಿಸಿದರೆ ನನ್ನದು ಅಳಿಲು ಸೇವೆ. ಜನರು ಕೊಟ್ಟ ಅವಕಾಶವನ್ನು ಬಳಸಿಕೊಂಡು ಜಿಲ್ಲೆಯ ಜನರ ಸೇವೆ ಮಾಡಿದ್ದೇನೆ ಎಂಬ ಧನ್ಯತಾ ಭಾವ ಮಾತ್ರ ನನ್ನದು. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಗಣ್ಯರ ಹೆಸರನ್ನು ಇಡಬೇಕು. ನನ್ನ ಹೆಸರನ್ನು ಇಡುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ನಿಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು. ನಾಡಿಗೆ ಕೊಡುಗೆ ನೀಡಿದ ಮಹನೀಯರ ಹೆಸರನ್ನು ಹೊಸ ವಿಮಾನ ನಿಲ್ದಾಣಕ್ಕೆ ಇಡುವುದು ಸೂಕ್ತ ಎಂದು ಮನವಿ ಮಾಡಿದ್ದಾರೆ.