ಬೆಂಗಳೂರು,ಮೇ 2: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ಮಧ್ಯಾಹ್ನ ಕೋಲಾರಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದ ಪರಿಣಾಮ ತುರ್ತು ಭೂ ಸ್ಪರ್ಶ ಮಾಡಲಾಗಿದ್ದು, ನಾನು ನಂಬಿರುವ ಶಕ್ತಿ ಹಾಗೂ ದೇವರು ನನ್ನ ಜತೆಗಿದ್ದು, ನನ್ನನ್ನು ಕಾಪಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಹೆಲಿಕಾಪ್ಟರ್ ನಲ್ಲಿ ಇದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಪೈಲಟ್ ಜಾಗರೂಕತೆಯಿಂದ ಭಾರಿ ಅವಘಡ ತಪ್ಪಿದೆ.
ಶಿವಕುಮಾರ್ ಅವರು ಮುಳಬಾಗಿಲಿನಲ್ಲಿ ಚುನಾವಣೆ ಪ್ರಚಾರ ಕಾರ್ಯಕ್ರಮಕ್ಕೆ ಮಂಗಳವಾರ ಮಧ್ಯಾಹ್ನ 12.10 ಸುಮಾರಿಗೆ ಜಕ್ಕೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಮಾಡಿದ್ದು, ಹೊಸಕೋಟೆ ಸಮೀಪ ಹದ್ದು ಡಿಕ್ಕಿ ಹೊಡೆದ ಪರಿಣಾಮ ಹೆಲಿಕಾಪ್ಟರ್ ಗಾಜು ಒಡೆದಿದೆ. ಈ ಸಂದರ್ಭದಲ್ಲಿ ಪೈಲಟ್ ಸಮಯಪ್ರಜ್ಞೆ ಮೆರೆದಿದ್ದು, ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್ ಅನ್ನು ತುರ್ತು ಭೂ ಸ್ಪರ್ಶ ಮಾಡಿದ್ದಾರೆ.