ಜೇವರ್ಗಿ, ಏಪ್ರಿಲ್ 28: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಗ್ರಾಮ ಪಂಚಾಯಿತಿಗೆ 1 ಕೋಟಿ ರೂಪಾಯಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 5,000 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಭರವಸೆ ನೀಡಿದರು.
ಮಳೆಯ ನಡುವೆಯೇ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ರಾಹುಲ್ ಮಾತನಾಡಿದರು. ಅಲ್ಲಿ ಅವರು 50,000 ಸರ್ಕಾರಿ ಉದ್ಯೋಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿಯೂ ಅವರು ಹೇಳಿದರು.
‘ನಾವು ಈ ಪ್ರದೇಶಕ್ಕೆ 5,000 ಕೋಟಿ ರೂ ನೀಡಲಿದ್ದೇವೆ. ಆ ಮೂಲಕ ಕಲ್ಯಾಣ ಕರ್ನಾಟಕದ ಪ್ರತಿ ಗ್ರಾಮ ಪಂಚಾಯತಿಗೆ ಒಂದು ಕೋಟಿ ರೂಪಾಯಿ ಸಿಗಲಿದೆ’ ಎಂದು ಕಲಬುರಗಿ ಜಿಲ್ಲೆಯಲ್ಲಿ ಜೇವರ್ಗಿಯಲ್ಲಿ ತಿಳಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶವು ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳನ್ನು ಒಳಗೊಂಡಿದೆ.