May 14, 2025
th

ಉಡುಪಿ : ಇತ್ತೀಚಿನ ದಿನಗಳಲ್ಲಿ ಮದುವೆಗೂ ಮುನ್ನ ಪ್ರಿ ವೆಡ್ಡಿಂಗ್ ಶೂಟ್‌ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೇವಸ್ಥಾನದ ಸೈಡ್‌ನಲ್ಲಿ ಫೋಟೋಶೂಟ್‌ ಮಾಡುವುದು ಹೆಚ್ಚಾಗುತ್ತಿದ್ದು, ಪ್ರಿ ವೆಡ್ಡಿಂಗ್ ಶೂಟ್ ಮಾಡುವುದಕ್ಕೆ ಕೆಲವೊಂದು ಧಾರ್ಮಿಕ ಕ್ಷೇತ್ರಗಳಲ್ಲಿ ವಿರೋಧ ಕೇಳಿ ಬರುತ್ತಿದೆ. ಇದೀಗ ಅಂತೆಯೇ ಉಡುಪಿಯ ಕೃಷ್ಣ ಮಠ ರಥ ಬೀದಿಯಲ್ಲಿ ಫೋಟೋಶೂಟ್ ಮಾಡುವಂತಿಲ್ಲ ಎಂದು ಆದೇಶಿಸಲಾಗಿದೆ.

ಉಡುಪಿಯ ಕೃಷ್ಣ ಮಠವು ಒಂದು ಕಡೆ ಧಾರ್ಮಿಕತೆ ಆಚರಣೆ ನಡೆಯುವ ಸ್ಥಳವಾಗಿ ಗುರುತಿಸಿಕೊಂಡಿದೆ. ಆದರೆ ಅದೇ ಊರಿನ ಮತ್ತೊಂದೆಡೆ ವಿವಿಧ ಊರುಗಳಿಂದ ಬರುವ ಫೋಟೋಗ್ರಾಫರ್‌ಗಳು, ಜೋಡಿಗಳು ವೆಡ್ಡಿಂಗ್ ಫೋಟೋಶೂಟ್ ಹೆಸರಿನಲ್ಲಿ ಸಲ್ಲಾಪ ಮಾಡುತ್ತಾರೆ. ಇದೊಂತರ ವಿರೋಧಭಾಸವಾಗಿ ಕಾಣಿಸುತ್ತಿದೆ. ಒಂದೆಡೆ ಧಾರ್ಮಿಕ ಪ್ರಜ್ಞೆ ವೃದ್ಧಿಸುತ್ತಿದ್ದರೆ, ಮತ್ತೊಂದೆಡೆ ಅದಕ್ಕೆ ತದ್ವಿರುದ್ಧವಾದ ವಾತಾವರಣಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಹೆಚ್ಚಾಗಿ ಕಠಿಣ ಕ್ರಮ ಕೈಗೊಳ್ಳಲೇ ಬೇಕಾಯಿತು ಎಂದು ಮಠದ ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಕೃಷ್ಣ ಮಠದ ರಥಬೀದಿ ಪಾರಂಪರಿಕ ಕಟ್ಟಡಗಳು ಇರುವ ಜಾಗ. ಪ್ರಿ ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್​​ ಹೆಸರಿನಲ್ಲಿ ಬೆಳ್ಳಂಬೆಳ್ಳಗ್ಗೆ ಮಠದ ಆವರಣದಲ್ಲಿ ಅಸಭ್ಯ ವರ್ತನೆ ಕಾಣಿಸುತ್ತಿದೆ. ಫೋಟೋಶೂಟ್ ನೆಪದಲ್ಲಿ ರಥಬೀದಿಯಲ್ಲಿ ಪ್ರೇಮ ಸಲ್ಲಾಪ ನಡೆಯುತ್ತಿದೆ. ಕೇರಳ ಬೆಂಗಳೂರು ಕಡೆಯಿಂದ ಬರುವ ಫೋಟೋಗ್ರಾಫರ್ಸ್ ಹಾವಳಿ ಹೆಚ್ಚಾಗಿದೆ. ಹೀಗಾಗಿ ಈ ಕುರಿತು ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಮಠದ ಅಧಿಕಾರಿಗಳು ತಿಳಿಸಿದ್ದಾರೆ. “ಅಷ್ಟಮಠಾಧೀಶರು ಓಡಾಡುವ ರಥಬೀದಿ ಇದಾಗಿದೆ. ನೂರಾರು ವರ್ಷಗಳಿಂದ ಯತಿಗಳು, ದಾಸರು ನಡೆದಾಡಿದ ಬೀದಿ ಇದಾಗಿದೆ. ಇದಕ್ಕೆ ಪಾವಿತ್ರ್ಯವಿದೆ. ಪ್ರತಿ ದಿನ ರಥ ಬೀದಿಯಲ್ಲಿ ಉತ್ಸವ ನಡೆಯುತ್ತದೆ. ಅಷ್ಟೇ ಅಲ್ಲದೆ ಇದು, ಅಷ್ಟಮಠಗಳು ಇರುವ ರಥಬೀದಿಯಾಗಿದೆ. ಇಲ್ಲಿ ಜೋಡಿಹಕ್ಕಿಗಳು ಸರಸ ಸಲ್ಲಾಪ ನಡೆಸುವುದು ಸರಿಯಲ್ಲ. ಹಾಗೆ ಮಾಡುವುದರಿಂದ ಧಾರ್ಮಿಕ ವಾತಾವರಣಕ್ಕೆ ಅಡ್ಡಿ ಆಗುತ್ತದೆ. ಹೀಗಾಗಿ ಮುಜುಗರದ ಸನ್ನಿವೇಶ ತಪ್ಪಿಸಲು ಈ ನಿರ್ಧಾರ ಮಾಡಿದ್ದೇವೆ” ಎಂದು ಮಠ ತಿಳಿಸಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>