

ಕೋಟ: ದೇಶದ ರಾಜಧಾನಿ ದೆಹಲಿಗೆ ಹಗಲು ವೇಳೆಯಲ್ಲಿ ಸಂಚರಿಸುವ ಪ್ರಯಾಣಿಕರಿಗಾಗಿ ಮತ್ತು ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ದೆಹಲಿಗೆ ತೆರಳುವ ಎರಡು ರೈಲುಗಳಿಗೆ ಕುಂದಾಪುರದಲ್ಲಿ ನಿಲುಗಡೆ ಬೇಕು ಎನ್ನುವುದು ಸಾರ್ವಜನಿಕರ ಮತ್ತು ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿಯ ಹಲವು ವರ್ಷಗಳ ಬೇಡಿಕೆಯಾಗಿತ್ತು.
ಈ ಹಿನ್ನೆಲೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸಚಿವ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ರೈಲು ಇಲಾಖಾ ರಾಜ್ಯ ಸಚಿವ ವಿ.ಸೋಮಣ್ಣನವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಅವರ ಮನವಿಯನ್ನು ಪರಿಗಣಿಸಿದ ಮಾನ್ಯ ಸಚಿವರುಗಳು, ಎರ್ನಾಕುಲಂ ನಿಜಾಮುದ್ದೀನ್ ಎಕ್ಸ್ಪ್ರೆಸ್ ಹಾಗೂ ತಿರುವನಂತಪುರಂ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲುಗಳನ್ನು ಕುಂದಾಪುರದಲ್ಲಿ ನಿಲುಗಡೆಗೆ ಒಪ್ಪಿಗೆ ಸೂಚಿಸಿ ಆದೇಶ ನೀಡಿದ್ದಾರೆ.
ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸಾರ್ವಜನಿಕರ ಪರವಾಗಿ ಮೋದಿಜೀ ಸರಕಾರಕ್ಕೆ , ಸಚಿವರುಗಳಿಗೆ ಮತ್ತು ಭಾರತೀಯ ರೈಲ್ವೆಗೆ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.