

ಉಡುಪಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಸೀಟುಗಳನ್ನು ನಿಶ್ಚಿತವಾಗಿ ಗೆಲ್ಲ ಲಿದ್ದು, ನರೇಂದ್ರ ಮೋದಿ ಅವರ ವಿಕಸಿತ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಲು ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸೋಣ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದರು.
ಬ್ರಹ್ಮಾವರದ ಆಕಾಶವಾಣಿಯಿಂದ ಬಸ್ ನಿಲ್ದಾಣದ ವರೆಗೆ ನಡೆದ ರೋಡ್ ಶೋದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಈ ಬಾರಿಯ ಚುನಾವಣೆ ದೇಶದ ಭವಿಷ್ಯದ ದೃಷ್ಟಿಯಿಂದ ಭಾರೀ ಮಹತ್ವದ ಚುನಾವಣೆಯಾಗಿದ್ದು, ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ಆರ್ಥಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರಕ್ಕೆ ಭದ್ರ ಬುನಾದಿ ಹಾಕಲು ಸರಕಾರ ಮುಂದಡಿ ಇಡಲಿದೆ. ದೇಶದ 543 ಕ್ಷೇತ್ರಗಳ ಅಭ್ಯರ್ಥಿಗಳಲ್ಲಿಯೇ ಅತೀ ಶ್ರೇಷ್ಠ, ಸರಳ ವ್ಯಕ್ತಿತ್ವದ ಅಭ್ಯರ್ಥಿಯನ್ನು ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಅವಕಾಶ ನೀಡಿದ್ದು, ಬಿಜೆಪಿಗೆ ನೀಡುವ ಪ್ರತಿಯೊಂದು ಮತ ಮೋದಿಗೆ ಶಕ್ತಿ ತುಂಬಲಿದೆ ಎಂದರು.
ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಎಲ್ಲ ಕಡೆ ಮತದಾರರು ಉತ್ತಮ ಸ್ಪಂದನೆ ನೀಡುತ್ತಿದ್ದು ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸಲು ಸಂಕಲ್ಪ ಮಾಡಿದ್ದಾರೆ ಎಂದರು.
ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಕೋಟ ಹಾಗೂ ಅಣ್ಣಾಮಲೈ ಇಬ್ಬರೂ ಈ ಬಾರಿ ಸಂಸದರಾಗಿ ಲೋಕಸಭೆ ಪ್ರವೇಶಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಪಕ್ಷದ ಮುಖಂಡರಾದ ಉದಯ ಕುಮಾರ್ ಶೆಟ್ಟಿ, ನವೀನ್ ಶೆಟ್ಟಿ ಕುತ್ಯಾರು, ಪ್ರಮೋದ್ ಮಧ್ವರಾಜ್, ರಘುಪತಿ ಭಟ್, ಮಟ್ಟಾರು ರತ್ನಾಕರ ಹೆಗ್ಡೆ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಪ್ರತಾಪ್ ಹೆಗ್ಡೆ ಮಾರಾಳಿ, ರಾಜೇಶ್ ಶೆಟ್ಟಿ ಬಿರ್ತಿ, ರಾಜೀವ್ ಕುಲಾಲ್, ಬಿ.ಎನ್. ಶಂಕರ ಪೂಜಾರಿ, ಧನಂಜಯ ಅಮೀನ್, ಹರಿಮಕ್ಕಿ ರತ್ನಾಕರ ಶೆಟ್ಟಿ, ನಿಶಾನ್ ರೈ ಮೊದಲಾದವರು ಉಪಸ್ಥಿತರಿದ್ದರು.