ಮಂಗಳೂರು, ಜೂನ್ 6: ಕರಾವಳಿ ಭಾಗದಲ್ಲಿ ನಡೆಯುವ ನೈತಿಕ ಪೊಲೀಸ್ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆಂಟಿ ಕಮ್ಯೂನಲ್ ವಿಂಗ್ನ ಹೊಸ ಘಟಕ ಆರಂಭಿಸುತ್ತೇವೆ. ಈ ವಿಂಗ್ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ. ಕರಾವಳಿ ಭಾಗದಲ್ಲಿ ಒಳ್ಳೆಯ ಜನರು ಇದ್ದಾರೆ ಎಂದು ನಾವೆಲ್ಲಾ ನಂಬಿದ್ದೇವೆ. ಈ ಭಾಗದಲ್ಲಿ ಭಯದ ವಾತಾವರಣವಿದೆ ಎಂದು ಜನರು ಮಾತಾನಾಡುತ್ತಿದ್ದಾರೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಸಮಸ್ಯೆಗಳು ಹಾಗೂ ಸವಾಲುಗಳ ಬಗ್ಗೆ ವಿಚಾರಿಸಿದ್ದೇನೆ. ನನಗೆ ಇದು ಹೊಸದಲ್ಲ. ನಾನು ಮೂರನೇ ಭಾರೀ ಗೃಹ ಸಚಿವನಾಗಿದ್ದೇನೆ. ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್ಗಿರಿ ತುಂಬಾ ನಡೆಯುತ್ತಿದೆ. ಇದನ್ನು ತಡೆಯದಿದ್ದರೆ ಇಲಾಖೆ, ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ. ಹಾಗಾಗಿ ನೈತಿಕ ಪೊಲೀಸ್ಗಿರಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು ಎಂದು ಸೂಚನೆ ನೀಡಿದರು.
ಮಂಗಳೂರಿನ ಪಶ್ಚಿಮ ವಲಯದ ಐಜಿಪಿ ಕಚೇರಿಯಲ್ಲಿ ಸಭೆಯಲ್ಲಿ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಡಾ.ಚಂದ್ರಗುಪ್ತ, ಆಯುಕ್ತ ಕುಲದೀಪ್ ಕುಮಾರ್ ಜೈನ್, ದಕ್ಷಿಣ ಕನ್ನಡ ಎಸ್ಪಿ ಸಿ.ಬಿ.ರಿಷ್ಯಂತ್, ಉತ್ತರ ಕನ್ನಡ ಎಸ್ಪಿ ವಿಷ್ಣುವರ್ಧನ್, ಉಡುಪಿ ಎಸ್ಪಿ ಅಕ್ಷಯ್ ಮತ್ತು ಚಿಕ್ಕಮಗಳೂರು ಎಸ್ಪಿ ಉಮಾಪ್ರಶಾಂತ್ ಇದ್ದರು.